ಕೋರೋನ: ಸಮಸ್ಯೆ ನಡುವೆ ಸಿಇಟಿ ಪರೀಕ್ಷೆ ಆರಂಭ.

ಮೈಸೂರು,
ಕೋವಿಡ್-19 ಹರಡುತ್ತಿರುವ ಕಾರಣ ಎಲ್ಲಾ ರೀತಿಯ ಕ್ರಮ ವಹಿಸಲಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗದೆ ಪರೀಕ್ಷೆಯನ್ನು ಬರೆಯಲು ಹಾಜರಾಗಿದ್ದಾರೆ
ಇ೦ದು ಜೀವಶಾಸ್ತ್ರ ಹಾಗೂ ಗಣಿತ, 31 ರಂದು ಭೌತಶಾಸ್ತ್ರ ಮತ್ತು ರಾಸಾಯನಿಶಾಸ್ತ್ರ ಪರೀಕ್ಷೆ ನಡೆಯಲಿವೆ. ಜಿಲ್ಲೆಯಲ್ಲಿ ಒಟ್ಟು 26 ಪರೀಕ್ಷಾ ಕೇಂದ್ರಗಳಿದ್ದು, ಮೈಸೂರು ನಗರದಲ್ಲಿ 20 ಹಾಗೂ ತಾಲ್ಲೂಕುಗಳಲ್ಲಿ 6 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 10,368 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರತೀ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ಅಳತೆಯಲ್ಲಿ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿದ್ದು, ಸೆಕ್ಷನ್ 144 ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಪೋಷಕರು ಹಾಗು ಇತರರು ಗುಂಪು ಸೇರುವುದನ್ನು ತಡೆಗಟ್ಟಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸರ್- ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೂ ಮುನ್ನ ಎರಡು ಗಂಟೆಗಳ ಮುಂಚಿತವಾಗಿ ಹಾಜರಿರಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸರಬೇಕು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು. ಸಿಇಟಿ ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಯಾವುದಾದರೂ ಒಂದು ಗುರುತಿನ ಚೀಟಿ ತರಬೇಕು ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪೀಡಿತ 3 ವಿದ್ಯಾರ್ಥಿಗಳಿದ್ದು, ಅವರನ್ನು ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಆ ವಿದ್ಯಾರ್ಥಿಗಳನ್ನು ಮನೆಯಿಂದ ಆಂಬ್ಯುಲೆನ್ಸ್‍ನಲ್ಲಿ ಕರೆತಂದು ಪರೀಕ್ಷೆ ಮುಗಿದ ಬಳಿಕೆ ಮರಳಿ ಅವರ ವಾಸಸ್ಥಾನಕ್ಕೆ ತಲುಪಿಸಲಾಗುವುದು. ಇಲ್ಲಿ ಇಬ್ಬರು ವೈದ್ಯರು, ಪ್ರಾಂಶುಪಾಲರು ಹಾಗೂ ಒಬ್ಬ ಉಪನ್ಯಾಸಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಕೆಮ್ಮು, ನೆಗಡಿ ಹಾಗೂ ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಅಗತ್ಯಕ್ಕೆ ತಕ್ಕಂತೆ ವಿಶೇಷ ಕೊಠಡಿ ಕಾಯ್ದಿರಿಸಲಾಗಿದೆ. ಕಂಟೈನ್‍ಮೆಂಟ್ ವಲಯಕ್ಕೆ ಸಿಲುಕುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಪ್ರತೀ 5 ಪರೀಕ್ಷಾ ಕೇಂದ್ರಗಳಿಗೆ ಒಂದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಕೇಂದ್ರಗಳಲ್ಲೂ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳು ಹಾಗೂ ಕಂಟೈನ್‍ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳು ಮಾಹಿತಿಯನ್ನು ನೀಡಬೇಕು. ನಿಮ್ಮ ಸುರಕ್ಷತೆ ಹಾಗೂ ನಿಮ್ಮೊಟ್ಟಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ನೈಜ ಪರಿಸ್ಥಿಯನ್ನು ಮರೆಮಾಚಬೇಡಿ ಎಂದು ಮನವಿ ಮಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಾಂಶುಪಾಲರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ವೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು ಜಾಗೃತ ದಳವನ್ನು ನೇಮಿಸಲಾಗಿದೆ ಎಂದರು.