ಮೈಸೂರು -9 ಇಂದಿರಾ ಕ್ಯಾಂಟಿನ್ ಗಳಿಗೆ ಶಂಕು ಸ್ಥಾಪನೆ

117
Share

 

ಬಡವರ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್ ಗಳು ಕಾರ್ಯ ನಿರ್ವಹಿಸುತ್ತಿವೆ – ಡಾ. ಹೆಚ್. ಸಿ ಮಹದೇವಪ್ಪ*

ಮೈಸೂರು ಮಾರ್ಚ್ 11 ಇಂದಿರಾ ಕ್ಯಾಂಟಿನ್ ಗಳು ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು

ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಇಂದಿರಾ ಕ್ಯಾಂಟಿನ್ ಶಂಕು ಸ್ಥಾಪನೆ ಹಾಗೂ ಮುಖ್ಯಮಂತ್ರಿಗಳ ನಗರೋತ್ಥಾನ 4 ರಡಿ ಆಯ್ದ ವೈಯಕ್ತಿಕ ಪಾಲನುಭವಿಗಳಿಗೆ ಸಹಾಯಧನ ವಿತರಣೆ ನೆರವೇರಿಸಿ ಅವರು ಮಾತನಾಡಿದರು. ಹೊಸದಾಗಿ 9 ಇಂದಿರಾ ಕ್ಯಾಂಟಿನ್ ಗಳಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಈಗಾಗಲೇ 2016 ರ ಇಸವಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳು ಆಗಿದ್ದಾಗ ಇಂದಿರಾ ಕ್ಯಾಂಟಿನ್ ಗಳನ್ನೂ ಹೊಸದಾಗಿ ಪ್ರಾರಂಭಿಸಲಾಯಿತು. 5 ರೂ ಗೆ ತಿಂಡಿ 10 ರು ಗೆ ಊಟ ನೀಡಲು ಆರಂಭಿಸಲಾಯಿತು. ಕರ್ನಾಟಕದಲ್ಲಿ 520 ಇಂದಿರಾ ಕ್ಯಾಂಟಿನ್ ಗಳು ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಕಡಿಮೆ ದರದಲ್ಲಿ ಉತ್ತಮ ತಿಂಡಿ ಊಟ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ 17 ಇಂದಿರಾ ಕ್ಯಾಂಟಿನ್ ಗಳು ಕೆಲಸ ಮಾಡುತ್ತಿದ್ದು ಇದರಲ್ಲಿ 12 ಮೈಸೂರು ನಗರದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಇಂದಿರಾ ಕ್ಯಾಂಟಿನ್ ಗಳಲ್ಲಿ ಹೊಸದಾಗಿ ರಾಗಿ ಮುದ್ದೆ ಸೊಪ್ಪು ಸಾರು ನೀಡಲು ಕ್ರಮ ವಹಿಸಲಾಗಿದೆ. ನಮ್ಮ ಸರ್ಕಾರದಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡಲಾಗುತ್ತಿದೆ. ಓದುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ಗಳ ವಿತರಣೆ ಮಾಡಲಾಗುತ್ತಿದೆ. ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಸಂವಿಧಾನದ ಮೂಲ ಉದ್ದೇಶವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.

ನಮ್ಮ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಬಡ ವರ್ಗದ ಜನತೆಗೆ ಆಹಾರ, ಮಹಿಳೆಯರಿಗೆ ಉಚಿತ ಪ್ರಯಾಣ, ಉಚಿತ ವಿದ್ಯುತ್, ನಿರುದ್ಯೋಗಿ ಯುವಕರಿಗೆ ಯುವನಿದಿ ಸಹಾಯಧನ ದೊರೆಯುತ್ತಿದೆ. ಇದರಿಂದ ಜನರ ಜೀವನಮಟ್ಟ ಸುಧಾರಿಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಇಂದು ನಗರದಲ್ಲಿ 9 ಇಂದಿರಾ ಕ್ಯಾಂಟಿನ್ ಗಳ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 17 ಇಂದಿರಾ ಕ್ಯಾಂಟಿನ್ ಗಳು ಕಾರ್ಯ ನಿರ್ವಹಿಸುತ್ತಿವೆ. ಊಟದ ಮೆನುವನ್ನು ಬದಲಾಯಿಸಿಕೊಂಡು ಮುದ್ದೆ ಮತ್ತು ಸೊಪ್ಪು ಸಾಂಬಾರ್ ನೀಡಲು ಟೆಂಡರ್ ನಲ್ಲಿ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕರಾದ ತನ್ವೀರ್ ಸೇಠ್ ಅವರು ಮಾತನಾಡಿ ಸರ್ಕಾರ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ. ದುಡಿಯುವ ವರ್ಗಕ್ಕೆ ಕಡಿಮೆ ದರದಲ್ಲಿ ಉತ್ತಮ ಆಹಾರ ನೀಡಲು ಇಂದಿರಾ ಕ್ಯಾಂಟಿನ್ ಗಳನ್ನು ಸರ್ಕಾರದ ವತಿಯಿಂದ ತೆರೆಯಲಾಗುತ್ತಿದೆ. ದುಡಿಮೆ ಮಾಡುವ ವರ್ಗಕ್ಕೆ ಹೊಟ್ಟೆ ತುಂಬಾ ಆಹಾರವನ್ನು ಕಡಿಮೆ ದರದಲ್ಲಿ ನೀಡುವುದು ಇದರ ಉದ್ದೇಶವಾಗಿದೆ. ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯುತ್ತಿರುವುದರಿಂದ, ವಿವಿಧ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಸಹಾಯಧನ ಸೌಲಭ್ಯವನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಶಾಸಕರಾದ ಕೆ ಹರೀಶ್ ಗೌಡ ವಿಧಾನ ಪರಿಷತ್ ಶಾಸಕರಾದ ಸಿ ಎನ್ ಮಂಜೇಗೌಡ, ಡಿ ತಿಮ್ಮಯ್ಯ, ಮೂಡಾ ಅಧ್ಯಕ್ಷರಾದ ಕೆ ಮರಿಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Share