ಸೆ.17ರಂದು ಕೋವಿಡ್ ಲಸಿಕಾ ಅಭಿಯಾನ; ಮೈಸೂರು ಜಿಲ್ಲೆಗೆ 1.25ಲಕ್ಷ ಲಸಿಕೆ ಹಾಕುವ ಗುರಿ : ಡಾ. ಬಗಾದಿ ಗೌತಮ್

273
Share

ಸೆ.17ರಂದು ಕೋವಿಡ್ ಲಸಿಕಾ ಅಭಿಯಾನ;
ಮೈಸೂರು ಜಿಲ್ಲೆಗೆ 1.25ಲಕ್ಷ ಲಸಿಕೆ ಹಾಕುವ ಗುರಿ : ಡಾ. ಬಗಾದಿ ಗೌತಮ್
ಮೈಸೂರು, – ಸೆಪ್ಟೆಂಬರ್ 17ರಂದು ದೇಶದಾದ್ಯಂತ ಬೃಹತ್ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಈ ಅಭಿಯಾನವನ್ನು ಸಂಪೂರ್ಣ ಯಶಸ್ವಿಗೊಳಿಸಲು ಎಲ್ಲಾ ಅಧಿಕಾರಿಗಳು ಸೂಕ್ತ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದರು.
ಬಹಳ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕಾ ಅಭಿಯಾನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ವೀಡಿಯೋ ಸಭೆ ನಡೆಸಿ, ಈ ಸೂಚನೆ ನೀಡಿದರು.
ಸೆಪ್ಟೆಂಬರ್ 17 ರಂದು ಮೈಸೂರು ಜಿಲ್ಲೆಗೆ 1.25 ಲಕ್ಷ ಕೋವಿಡ್ ಲಸಿಕೆ ಹಾಕುವ ಗುರಿ ನೀಡಲಾಗಿದೆ. ಈ ಹಿಂದೆ ನಡೆದ ಲಸಿಕಾ ಅಭಿಯಾನಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಒಂದೇ ದಿನ ಗರಿಷ್ಠ 60 ಸಾವಿರದ ವರೆಗೆ ಲಸಿಕೆ ಹಾಕಲಾಗಿದೆ. ಈಗಿನ ಗುರಿ 1.25 ಲಕ್ಷ ಆಗಿರುವುದರಿಂದ ಈ ಅಭಿಯಾನವನ್ನು ವಿಶೇಷವಾಗಿ ತೆಗೆದುಕೊಂಡು ಗುರಿ ಮುಟ್ಟಲೇಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇದುವರೆಗೂ ಆಗಿರುವ ಲಸಿಕೆ ಅಭಿಯಾನಕ್ಕಿಂತ ಶುಕ್ರವಾರ ಹಮ್ಮಿಕೊಂಡಿರುವ ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾಗಿರುವುದು ವಿಶೇಷ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳನ್ನು ಗುರುತಿಸಿದ್ದಾರೆ. 600 ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನೆಷನ್ ಆಗಬೇಕು. ಇದಕ್ಕಾಗಿ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿ ಮತ್ತಿತರ ಅಧಿಕಾರಿ ನಿಮಗೆ ಸೀಮಿತವಾಗಿರುವ ಬೂತ್‌ಗಳಿಗೆ ತೆರಳಿ ಪರಿಶೀಲನೆ ಮಾಡಬೇಕು. ಚುನಾವಣಾ ಕೆಲಸದ ಮಾದರಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ಈ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಲಸಿಕೆ ನೀಡಲು ಜನರನ್ನು ಗುರುತಿಸಬೇಕು. ಇದಕ್ಕಾಗಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಬೇಕು. ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸೇರಿದಂತೆ ಇತರೆ ಆರೋಗ್ಯ ಸಿಬ್ಬಂದಿಗಳು ಕಳೆದ ಬಾರಿಗಿಂತ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಬೇಕು ಎಂದು ಹೇಳಿದರು.
ಕೋವಿಡ್ ಪರೀಕ್ಷೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು. ಕೋವಿಡ್ ಅನ್ನು ನಿಯಂತ್ರಿಸಲು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು. ಕೋವಿಡ್ ಅನ್ನು ನಿಯಂತ್ರಿಸಲು ಪರೀಕ್ಷೆ ಪ್ರಮುಖ ಮಾರ್ಗವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವುದರ ಶ್ರೇಯಸ್ಸು ಕ್ಷೇತ್ರಮಟ್ಟದಲ್ಲಿ ಕೆಲಸ ನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಸಲ್ಲುತ್ತದೆ ಎಂದು ಶ್ಲಾಘಿಸಿದರು.
ಸಭೆಯಲ್ಲಿ ಜಿಲ್ಲಾಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ನಗರಪಾಲಿಕೆ ಆಯುಕ್ತ ಜಿ.ಲಕ್ಷಿö್ಮಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಡಿಎಚ್‌ಒ ಡಾ.ಕೆ.ಎಚ್.ಪ್ರಸಾದ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಆರ್‌ಸಿಹೆಚ್ ಅಧಿಕಾರಿ ಡಾ.ಜಯಂತ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಪ್ರಸಾದ್, ಎಂ.ಎA.ಸಿ.ಆರ್.ಐ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಷಾದ್ ರೆಹಮಾನ್ ಶರೀಫ್, ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಸೇರಿದಂತೆ ಇತರರು ಹಾಜರಿದ್ದರು.


Share